*ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿದ್ದಾರೆ.
ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವುದರ ಜೊತೆಗೆ, ತಾವೇ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದು, ಜನರ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಗುರುವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಓಂಕಾರ್ ನಗರಕ್ಕೆ ಭೇಟಿ ನೀಡಿದ ಅವರು, ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ ವಿವಿಧ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ, ಈವರೆಗೆ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಆರಂಭವಾಗಲಿರುವ ಹೊಸ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಬಳಿಕ ಹಿಂಡಲಗಾ ಗ್ರಾಮದ ಸಂಕಲ್ಪ ಲೇಔಟ್ಗೆ ಭೇಟಿ ನೀಡಿದ ಅವರು, ಸ್ಥಳೀಯರು ಎದುರಿಸುತ್ತಿರುವ ರಸ್ತೆ, ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಖುದ್ದಾಗಿ ಮಾಹಿತಿ ಪಡೆದು, ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಲೇಔಟ್ನಲ್ಲಿ ಈಗಾಗಲೇ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಲಾಯಿತು. ಜೊತೆಗೆ, ಮುಂಬರುವ ದಿನಗಳಲ್ಲಿ ಈ ಭಾಗದಲ್ಲಿ ಅನುಷ್ಠಾನಗೊಳ್ಳಲಿರುವ ಹೊಸ ಅಭಿವೃದ್ಧಿ ಯೋಜನೆಗಳ ಕುರಿತು ಸಾರ್ವಜನಿಕರೊಂದಿಗೆ ಮಾಹಿತಿ ಹಂಚಿಕೊಳ್ಳಲಾಯಿತು.
ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಪರಿಹಾರಕ್ಕೆ ಮುಂದಾಗುತ್ತಿರುವ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರ್ಯವೈಖರಿ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರ ನಿರಂತರ ಜನಸಂಪರ್ಕ ಮತ್ತು ಜನಸ್ಪಂದನೆಗೆ ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, “ಇಂತಹ ಜನಪ್ರತಿನಿಧಿಯನ್ನು ಪಡೆದಿರುವುದು ನಮ್ಮ ಭಾಗ್ಯ” ಎಂದು ಅನೇಕ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.*******************************






