*ಜುಲೈ 11 ರಂದು ರಾಷ್ಟ್ರೀಯ ಲೋಕ ಅದಾಲತ್; ಸಂಚಾರಿ ಇ-ಚಲನ್ ಹಾಗೂ ಸಾರಿಗೆ ಇಲಾಖೆಯಲ್ಲಿನ ಬಾಕಿ ಪ್ರಕರಣಗಳ ದಂಡದಲ್ಲಿ ಶೇ.50 ರಷ್ಟು ರಿಯಾಯಿತಿ*

ಪ್ರಕೃತಿ ಬೆಳಗಾವಿ ಸುದ್ದಿ : ಧಾರವಾಡ : ಜೂ.22: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ರಾಜೀ ಆಗಬಹುದಾದ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸುವ ಉದ್ದೇಶದಿಂದ ಜುಲೈ 11, 2026 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ. ವಿಜಯ್ ಅವರು ಹೇಳಿದರು.
ಇಂದು (ಜೂ.22) ಮಧ್ಯಾಹ್ನ ಧಾರವಾಡ ಜಿಲ್ಲಾ ನ್ಯಾಯಾಲಯದ 2ನೇ ಮಹಡಿಯಲ್ಲಿರುವ ಕಾನ್ಫರೆನ್ಸ್ ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ಜೂನ್ 4, 2026 ರಂದು ಹೊರಡಿಸಿದ ಆದೇಶದಂತೆ, ಮೇ-2026 ರ ಮೊದಲು ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತ ಹಾಗೂ ಸಾರಿಗೆ ಇಲಾಖೆಯಲ್ಲಿ 1991 ರಿಂದ 2022 ರ ಅವಧಿಯಲ್ಲಿ ದಾಖಲಾಗಿರುವ ಬಾಕಿ ದಂಡದ ಪ್ರಕರಣಗಳ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದರು.
ಈ ರಿಯಾಯಿತಿಯನ್ನು ಪಡೆಯಲು ಜೂನ್ 21 ರಿಂದ ಜುಲೈ 10, 2026 ರವರೆಗೆ 20 ದಿನಗಳ ಕಾಲಾವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಲ್ಲಪ್ಪ ಎಂ.ಬಡಿಗೇರ, ಸಹಾಯಕ ಪೊಲೀಸ್ ಆಯುಕ್ತ (ACP) ವಿರೇಶ್, ಟ್ರಾಫಿಕ್ ಟೌನ್ ಆಫೀಸರ್ (RTO) ಶ್ರೀಧರ್ ಮಲ್ಹಾಡ ಇದ್ದರು.*************************************





