ಪ್ರಕೃತಿ ಬೆಳಗಾವಿ

*ಹಕ್ಕಿ-ಪಿಕ್ಕಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಕ್ರಮ: ಜಿಪಂ ಸಿಇಒ ರಾಹುಲ್ ಶಿಂಧೆ*

*ಖಾನಾಪೂರ ತಾಲೂಕಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ; ತಾಲೂಕಾಮಟ್ಟದ ಅಧಿಕಾರಿಗಳ ಸಭೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಂದಿರಾ ನಗರದಲ್ಲಿ ಹಕ್ಕಿ-ಪಿಕ್ಕಿ ಸಮುದಾಯದ ಜನರು ವಾಸವಿರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ, ಅಲ್ಲಿನ ಕುಟುಂಬಗಳ ಸಮಸ್ಯೆಗಳು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಸಮುದಾಯದ ಎಲ್ಲ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಿಸಿ, ಉತ್ತಮ ಶಿಕ್ಷಣ ಕೊಡಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಕ್ರಮವಹಿಸಬೇಕು ಎಂದು ಸ್ಥಳದಲ್ಲಿ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳನ್ನು ಗುರುತಿಸಿ ಶೇ.100ರಷ್ಟು ದಾಖಲಾತಿ ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅವರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗದ ಅವಕಾಶಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮುದಾಯದ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿ ಒದಗಿಸಲು ಕ್ರಮವಹಿಸುವಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದ ಅವರು, ಅಗತ್ಯವಿದ್ದಲ್ಲಿ ಆಧಾರ್ ನೋಂದಣಿ ಸಿಬ್ಬಂದಿಯನ್ನು ಸ್ಥಳಕ್ಕೇ ಕರೆಸಿ ಸೇವೆ ಒದಗಿಸುವಂತೆ ಸೂಚಿಸಿದರು. ಚಿಕ್ಕ ಮಕ್ಕಳನ್ನು ಅಂಗನವಾಡಿಗೆ ದಾಖಲಿಸಿ ಪೌಷ್ಠಿಕ ಆಹಾರ ಹಾಗೂ ಅಗತ್ಯ ಸೇವೆಗಳನ್ನು ಒದಗಿಸಲು ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಿದರು.

ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಶಾಶ್ವತ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಜಲಜೀವನ್ ಮಿಷನ್ ಕಾಮಗಾರಿ ಪರಿಶೀಲನೆ:

ಬಳಿಕ ಬರಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಂಡರಗಾಳಿ ಗ್ರಾಮದಲ್ಲಿ ಜಲಜೀವನ ಮಿಷನ್ ಕಾಮಗಾರಿಯನ್ನು ವೀಕ್ಷಿಸಿ ಕಾಮಗಾರಿಯ ಗುಣಮಟ್ಟ ಹಾಗೂ ಪ್ರಗತಿಯನ್ನು ಪರಿಶೀಲಿಸಿದರು. ನಂತರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿನ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಗ್ರಾಮದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಿದರು.

ತಾಲೂಕಾಮಟ್ಟದ ಅಧಿಕಾರಿಗಳ ಸಭೆ:

ನಂತರ ತಾಲೂಕಾ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಯ ಪ್ರಗತಿ ಪರಿಶೀಲಿಸಿದರು.

ಡೆಂಗ್ಯೂ ನಿಯಂತ್ರಣಕ್ಕಾಗಿ ಗ್ರಾಮಮಟ್ಟದಲ್ಲಿ ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಅಗತ್ಯವಿರುವ ಪ್ರದೇಶಗಳಲ್ಲಿ ಮೊಬೈಲ್ ಹೆಲ್ತ್ ಘಟಕಗಳನ್ನು ಸ್ಥಾಪಿಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಬಿ-ಜಿ ರಾಮ್ ಜಿ ಕರಪತ್ರಗಳ ಬಿಡುಗಡೆ:

ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯನ್ನು ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸಬೇಕು. ಮಾನವ ದಿನಗಳ ಸೃಜನೆಗೆ ಅಗತ್ಯ ಕ್ರಮವಹಿಸಬೇಕು. ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. ಇದೇ ಸಂದರ್ಭದಲ್ಲಿ ಯೋಜನೆಯ ಮಾಹಿತಿ ಒಳಗೊಂಡಿರುವ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.

ಬೆಳೆ ವಿಮೆ ಕುರಿತು ಹೆಚ್ಚಿನ ಪ್ರಚಾರ ಕೈಗೊಂಡು ಎಲ್ಲ ಅರ್ಹ ರೈತರಿಗೆ ವಿಮಾ ಸೌಲಭ್ಯ ತಲುಪುವಂತೆ ಕ್ರಮಕೈಗೊಳ್ಳಬೇಕು. ವಿವಿಧ ಇಲಾಖೆಗಳ ಮೂಲಕ ಪೂರ್ಣಗೊಂಡಿರುವ ಶಾಲಾ ಕಟ್ಟಡ ಕಾಮಗಾರಿಗಳನ್ನು ಸಂಬಂಧಿತ ಇಲಾಖೆಯಿಂದ ಶಿಕ್ಷಣ ಇಲಾಖೆಗೆ ಕಡ್ಡಾಯವಾಗಿ ಹಸ್ತಾಂತರ ಮಾಡಬೇಕು. ಶಿಕ್ಷಕರು ಶಾಲೆಗಳಲ್ಲಿ ನಿಯಮಿತವಾಗಿ ಹಾಜರಿದ್ದು ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಬಗ್ಗೆ ಸಂಬಂಧಿತ ಅಧಿಕಾರಿಗಳು ನಿಗಾವಹಿಸಬೇಕು ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಮೇತ್ರಿ, ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಜಾಧವ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಹತ್ತಿ, ತಾಪಂ ಪಂಚಾಯತರಾಜ್ ಸಹಾಯಕ ನಿರ್ದೇಶಕ ವಿಜಯ ಕೋತಿನ, ತಾಪಂ ಗ್ರಾಮೀಣಾಭಿವೃದ್ಧಿ ಸಹಾಯಕ ನಿರ್ದೇಶಕ ಶಶಿಧರ ಬಳ್ಳಾರಿ, ಹಲಕರ್ಣಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರೇಶ್ಮಾ ಪಾನೀವಾಲೆ ಸೇರಿ ವಿವಿಧ ಇಲಾಖೆಯ ತಾಲೂಕಾಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಹಕ್ಕಿ-ಪಿಕ್ಕಿ ಸಮುದಾಯದ ಮುಖಂಡರು ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.**********************************

Leave a Reply

Your email address will not be published. Required fields are marked *

Back to top button