ಪ್ರಕೃತಿ ಬೆಳಗಾವಿ

*ದೇವಸ್ಥಾನ ನಿರ್ಮಾಣದ ಎರಡನೇ ಹಂತದ ಕಾಮಗಾರಿಗೆ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಾಳೇಕುಂದ್ರಿ ಬಿ.ಕೆ. ಗ್ರಾಮದಲ್ಲಿ ಸುಮಾರು ₹1.20 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಎರಡನೇ ಹಂತದ ಕಾಮಗಾರಿಗಾಗಿ ಬಿಡುಗಡೆಯಾದ ಅನುದಾನದ ಚೆಕ್ ಅನ್ನು ಶುಕ್ರವಾರ ದೇವಸ್ಥಾನದ ಟ್ರಸ್ಟ್ ಕಮಿಟಿಯ ಪದಾಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹಸ್ತಾಂತರಿಸಿದರು.

ಗ್ರಾಮದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ಸುಂದರೀಕರಣದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ದೇವಸ್ಥಾನದ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ ಗ್ರಾಮಸ್ಥರು ಹಾಗೂ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ. ದೇವಸ್ಥಾನವು ಗ್ರಾಮದಲ್ಲಿ ಧಾರ್ಮಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಕೇಂದ್ರವಾಗಲಿದೆ ಎಂದು ಅವರು ತಿಳಿಸಿದರು.

ದೇವಸ್ಥಾನಗಳ ಅಭಿವೃದ್ಧಿಯು ಕೇವಲ ಕಟ್ಟಡ ನಿರ್ಮಾಣಕ್ಕೆ ಸೀಮಿತವಾಗದೆ, ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ದೇವಸ್ಥಾನದ ನಿರ್ಮಾಣ ಕಾಮಗಾರಿ ನಿಗದಿತ ರೀತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ನಡೆಯಬೇಕು. ಗ್ರಾಮಸ್ಥರು ಮತ್ತು ದೇವಸ್ಥಾನದ ಟ್ರಸ್ಟ್ ಕಮಿಟಿಯವರು ಕಾಮಗಾರಿಯ ಮೇಲ್ವಿಚಾರಣೆ ನಡೆಸಿ, ಉತ್ತಮ ರೀತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸಲಹೆ ನೀಡಿದರು.

ಚೆಕ್ ಹಸ್ತಾಂತರ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ದೇವಸ್ಥಾನ ಟ್ರಸ್ಟ್ ಕಮಿಟಿಯ ಹೊನಗೌಡ ಪಾಟೀಲ, ಸುರೇಶ್ ಕಾಳೋಜಿ, ಪ್ರವೀಣ ಪಾಟೀಲ, ಪ್ರಹ್ಲಾದ ಪಾಟೀಲ, ನಾಗೇಶ್ ದೇಸಾಯಿ, ಪ್ರೇಮ ಕೋಲಕಾರ, ಅಪ್ಸರ್ ಜಮಾದಾರ, ನೂರ್ ಮುಲ್ಲಾ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ದೇವಸ್ಥಾನ ಟ್ರಸ್ಟ್ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.

ಗ್ರಾಮದ ಪ್ರಮುಖರು ದೇವಸ್ಥಾನದ ಅಭಿವೃದ್ಧಿಗೆ ಸಹಕಾರ ನೀಡಿದ್ದಕ್ಕಾಗಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.**********************************

Leave a Reply

Your email address will not be published. Required fields are marked *

Back to top button