ಪ್ರಕೃತಿ ಬೆಳಗಾವಿ

*ಕಾಳೇನಟ್ಟಿಯಲ್ಲಿ ₹35 ಲಕ್ಷ ವೆಚ್ಚದಲ್ಲಿ ದುರ್ಗಾದೇವಿ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಳೇನಟ್ಟಿ ಗ್ರಾಮದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಶ್ರೀ ದುರ್ಗಾದೇವಿ ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಭೂಮಿಪೂಜೆ ನೆರವೇರಿಸಲಾಯಿತು.

ಸುಮಾರು ₹35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮಂದಿರದ ನೂತನ ಕಟ್ಟಡ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ, ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಗಳ ಅಭಿವೃದ್ಧಿಯೊಂದಿಗೆ ಅಲ್ಲಿನ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪರಂಪರೆಯ ತಾಣಗಳ ಸಂರಕ್ಷಣೆಯೂ ಅಗತ್ಯವಾಗಿದೆ. ದೇವಸ್ಥಾನಗಳು ಕೇವಲ ಪೂಜಾ ಸ್ಥಳಗಳಾಗಿರದೆ, ಗ್ರಾಮಸ್ಥರನ್ನು ಒಗ್ಗೂಡಿಸುವ ಮತ್ತು ನಮ್ಮ ಸಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಮುಖ ಕೇಂದ್ರಗಳಾಗಿವೆ ಎಂದು ಹೇಳಿದರು.

ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ದೇವಸ್ಥಾನಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಕ್ರಮ ಕೈಗೊಳ್ಳಲಾಗಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ರಸ್ತೆ, ಚರಂಡಿ, ಕುಡಿಯುವ ನೀರು, ಸಮುದಾಯ ಭವನ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಯ ಜೊತೆಗೆ ಗ್ರಾಮಗಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾಳೇನಟ್ಟಿ ಗ್ರಾಮದ ಶ್ರೀ ದುರ್ಗಾದೇವಿ ಮಂದಿರದ ನೂತನ ಕಟ್ಟಡ ನಿರ್ಮಾಣದಿಂದ ಗ್ರಾಮಸ್ಥರ ಬಹುದಿನಗಳ ಆಶಯ ಈಡೇರಿದಂತಾಗಿದೆ. ಸುಸಜ್ಜಿತ ಮಂದಿರ ನಿರ್ಮಾಣಗೊಂಡ ಬಳಿಕ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿವಿಧ ಉತ್ಸವಗಳನ್ನು ಹೆಚ್ಚಿನ ಸೌಲಭ್ಯಗಳೊಂದಿಗೆ ಆಯೋಜಿಸಲು ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು.************************************

Leave a Reply

Your email address will not be published. Required fields are marked *

Back to top button