ಪ್ರಕೃತಿ ಬೆಳಗಾವಿ

*ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ*

ಪ್ರಕೃತಿ ಬೆಳಗಾವಿ ಸುದ್ದಿ : ತುಮಕೂರು : ಪ್ರೀತಿ ಬಲೆಗೆ ಬಿದ್ದು ಮನೆತನದ ಗೌರವ ಬೀದಿಪಾಲು ಮಾಡಿದ್ದಾಳೆ ಎಂದು ಕೋಪಗೊಂಡು ಮಗಳನ್ನೇ ತಂದೆ ಹತ್ಯೆ ಮಾಡಿದ ಘಟನೆ ತುಮಕೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಿಮ್ಮರಾಯಪ್ಪ ಬಂಧಿತ ಆರೋಪಿ. ಶಿರಾ ತಾಲೂಕು ನಿಂಬೆ ಮರದಹಳ್ಳಿಯ ಮೇಘನ (17) ಎಂಬಾಕೆ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಾಯಿ ತಿಂಗಳ ಹಿಂದೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ಬಾಲಕಿಯ ತಂದೆ ತಲೆ ಮರೆಸಿಕೊಂಡಿದ್ದ. ಆತನ ಪತ್ತೆಗೆ ತೀವ್ರ ಹುಡುಕಾಟ ನಡೆಸಿದ ಪೊಲೀಸರು ಕೊನೆಗೂ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮಗಳನ್ನು ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಮಗಳು ಮೇಘನ ತನ್ನ ತಾಯಿ ಕಡೆಯ ಸಂಬಂಧಿಯೊಬ್ಬನ ಜತೆ ಪ್ರೀತಿಯಲ್ಲಿ ಬಿದ್ದಿದ್ದಳು, ಮಗಳು ಚಿಕ್ಕವಳಾಗಿದ್ದರಿಂದ ತಂದೆ ತಿಮ್ಮರಾಯಪ್ಪ ಮಗಳ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ತಂದೆ-ಮಗಳ ನಡುವೆ ಮನೆಯಲ್ಲಿ ಅನೇಕ ಬಾರಿ ಜಗಳ ನಡೆದಿತ್ತು.

ಏಪ್ರಿಲ್ 16ರಂದು ಕೂಡ ಜಗಳವಾಗಿದ್ದು, ಮಗಳು ಮಾತು ಕೇಳುತ್ತಿಲ್ಲ ಎಂದು ಕೋಪಗೊಂಡ ತಿಮ್ಮರಾಯಪ್ಪ ಆಕೆಯನ್ನು ಕೊಲೆ ಮಾಡಿ ತನ್ನ ಜಮೀನಿನ ಪಕ್ಕದ ಸರ್ಕಾರಿ ಹಳ್ಳದಲ್ಲಿ ಶವವನ್ನು ಹೂತು ಹಾಕಿದ್ದಾನೆ.

ಈ ನಡುವೆ ಮಗಳು ಕಾಣೆಯಾಗಿದ್ದಾಳೆಂದು ತಾಯಿ ನಾಪತ್ತೆ ದೂರು ದಾಖಲಿಸಿದ್ದರು. ಕಳ್ಳಂಬೆಳ್ಳ ಪೊಲೀಸರು ಪ್ರಕರಣ ಭೇದಿಸಿದ್ದು, ಮಧುಗಿರಿ ಉಪ ವಿಭಾಗಾಧಿಕಾರಿ ಹಾಗೂ ಶಿರಾ ತಹಸೀಲ್ದಾರ್ ನೇತೃತ್ವದಲ್ಲಿ ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.*****************************

Back to top button