ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಗರ್ಭಿಣಿ ಆತ್ಮಹತ್ಯೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಕಲಬುರಗಿ : ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಅಂಬಿಕಾ (25) ಹಾಗೂ ಅವರ ಪುತ್ರ ಆರಾಧ್ಯ ಎಂದು ಗುರುತಿಸಲಾಗಿದೆ. ಅಂಬಿಕಾ ಅವರಿಗೆ ಮೂರು ವರ್ಷಗಳ ಹಿಂದೆ ವೀರಭದ್ರಪ್ಪ ಅವರೊಂದಿಗೆ ವಿವಾಹವಾಗಿದ್ದು, ದಂಪತಿಗೆ ಒಂದೂವರೆ ವರ್ಷದ ಮಗುವಿತ್ತು. ಅಲ್ಲದೆ, ಅಂಬಿಕಾ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದುಬಂದಿದೆ.
ಜೂನ್ 23ರಂದು ಮನೆಯಿಂದ ಹೊರಟಿದ್ದ ಅಂಬಿಕಾ ಸಂಜೆವರೆಗೂ ಮನೆಗೆ ಮರಳದ ಹಿನ್ನೆಲೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದರು.
ಈ ವೇಳೆ ಗ್ರಾಮದ ಹೊರವಲಯದಲ್ಲಿರುವ ಬಾವಿಯ ಸಮೀಪ ಅವರ ಚಪ್ಪಲಿಗಳು ಪತ್ತೆಯಾಗಿದ್ದು, ಅನುಮಾನಗೊಂಡು ಬಾವಿಯಲ್ಲಿ ಪರಿಶೀಲನೆ ನಡೆಸಿದಾಗ ತಾಯಿ ಮತ್ತು ಮಗುವಿನ ಮೃತದೇಹಗಳು ಪತ್ತೆಯಾಗಿವೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಈ ದುರ್ಘಟನೆಯಲ್ಲಿ ಗರ್ಭದಲ್ಲಿದ್ದ ಮಗು ಸೇರಿ ಒಂದೇ ಕುಟುಂಬದ ಮೂರು ಜೀವಗಳು ಕಳೆದುಹೋಗಿರುವುದು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.*********************************






