*ಅನುಷ್ಟಾನ ಇಲಾಖೆಗಳಿಂದ ‘ವಿಬಿ-ಜಿ ರಾಮ್ ಜಿ’ ಯೋಜನೆಯ ಸಮರ್ಪಕ ಅನುಷ್ಟಾನ ಕೈಗೊಳ್ಳಿ: ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಅನುಷ್ಟಾನ ಇಲಾಖೆಗಳಿಂದ ‘ವಿಬಿ-ಜಿ ರಾಮ್ ಜಿ’ ಯೋಜನೆಯ ಸಮರ್ಪಕ ಅನುಷ್ಟಾನ ಕೈಗೊಳ್ಳುವಂತೆ ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ‘ವಿಬಿ-ಜಿ ರಾಮ್ ಜಿ’ ಯೋಜನೆಯ ಕುರಿತು ಅನುಷ್ಟಾನ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಅನುಷ್ಟಾನ ಇಲಾಖೆಗಳಿಂದ ಸಮುದಾಯ ಕಾಮಗಾರಿಗಳು ಹಾಗೂ ರೈತರಿಗೆ ಅನುಕೂಲವಾಗುವಂತಹ ಜೀವನೋಪಾಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಸಂಬಂಧಪಟ್ಟ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತ್ವರಿತವಾಗಿ ಕ್ರಿಯಾಯೋಜನೆ ರೂಪಿಸಿ ಅಗತ್ಯ ಕ್ರಮವಹಿಸಬೇಕು. ಗ್ರಾಮೀಣ ಜನರಿಗೆ ಯೋಜನೆಯ ಅನುಕೂಲ ಒದಗಿಸಿಕೊಡಬೇಕು ಎಂದು ನಿರ್ದೇಶನ ನೀಡಿದರು.
318 ವಿವಿಧ ಕಾಮಗಾರಿಗಳು:
‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಒಟ್ಟು 318 ಅನುಮೋದಿತ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಕೃಷಿ ಇಲಾಖೆಯಿಂದ ಕೃಷಿ ಹೊಂಡ, ಗೋಕಟ್ಟೆ, ಚೆಕ್ ಡ್ಯಾಮ್, ರೀಚಾರ್ಜ್ ಫಿಟ್, ತಿರುಗಾಲುವೆ ಸೇರಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ತೋಟಗಾರಿಕಾ ಇಲಾಖೆಯಿಂದ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದು ಸೇರಿ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳಬಹುದು. ರೇಷ್ಮೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಅರಣ್ಯ ಇಲಾಖೆಯಿಂದಲೂ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಮಾಹಿತಿ ನೀಡಿ, ಸಮರ್ಪಕ ಅನುಷ್ಟಾನಕ್ಕೆ ಕ್ರಮವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕರಾದ ರವಿ ಬಂಗಾರೆಪ್ಪನವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಎಚ್.ಡಿ. ಕೋಳೆಕರ್, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಂತೋಷ ಕೊಪ್ಪದ, ಡಿಎಫ್ಒ ರಾಜೇಶ್ವರಿ ಈರನಟ್ಟಿ ಸೇರಿ ಜಿಪಂ ಸಿಬ್ಬಂದಿ ಹಾಗೂ ವಿವಿಧ ಅನುಷ್ಟಾನ ಇಲಾಖೆಗಳ ಅಧಿಕಾರಿಗಳು, ತಾಂತ್ರಿಕ ಸಹಾಯಕರು ಹಾಜರಿದ್ದರು.**********************************






