ಈಶ್ವರಪ್ಪ ಮನೆಯಲ್ಲಿ ಚರ್ಚೆಯಾದ ವಿಷಯ ಬಹಿರಂಗ ಪಡಿಸಿದರೆ ರಾಜುಗೌಡಗೆ ವಿಜಯೇಂದ್ರನೇ ಹೊಡೆಯುತ್ತಾನೆ: ರಮೇಶ್ ಜಾರಕಿಹೊಳಿ ಕಿಡಿ…!!

ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ…
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ರಾಜ್ಯ ಬಿಜೆಪಿಯ ಬಣ ರಾಜಕೀಯ ತಾರಕಕ್ಕೇರಿದೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಹಾಗೂ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ, ಯತ್ನಾಳ್ ಪ್ರತ್ಯೇಕ ಸಭೆಗಳನ್ನು ನಡೆಸಿ ಕಮಲ ಪಡೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ.
ಈ ನಡುವೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೊನ್ನೆ ಈಶ್ವರಪ್ಪ ಮನೆಯಲ್ಲಿ ನಡೆದ ರಹಸ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಬಹಿರಂಗ ಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ಚರ್ಚೆಯಾದ ವಿಷಯಗಳನ್ನು ರಾಜುಗೌಡ ಬಹಿರಂಗ ಮಾಡಿದರೆ, ಆತನಿಗೆ ವಿಜಯೇಂದ್ರನೇ ಹೊಡೆಯುತ್ತಾನೆ ಎಂದು ಏಕವಚನದಲ್ಲಿ ಕಿಡಿಕಾರಿದ್ದಾರೆ.
ಅಂದು ಈಶ್ವರಪ್ಪ ಮನೆಯಲ್ಲಿ ರಾಜುಗೌಡ ಇದ್ದಾನೆ ಎಂದು ಗೊತ್ತಿದ್ದರೆ ನಾನು ಒಳಗಡೆಯೇ ಹೊಗುತ್ತಿರಲಿಲ್ಲ. ಅಲ್ಲಿ ಒಳಗಡೆ ಚರ್ಚೆಯಾಗಿದ್ದನ್ನು ಬಹಿರಂಗಪಡಿಸಿದರೆ ರಾಜುಗೌಡಗೆ ವಿಜಯೇಂದ್ರನೇ ಹೊಡೆಯುತ್ತಾನೆ ಎಂದರು.
ಈಶ್ವರಪ್ಪ ಅವರ ಮನೆಯಲ್ಲಿ ಮೀಸಲಾತಿ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ಚರ್ಚೆ ಮಾಡುತ್ತಿದ್ದರು. ಇದು ಸೌಹಾರ್ದತೆಯ ಸಭೆ. ಆದರೆ ರಾಜುಗೌಡ ಮಾಧ್ಯಮದ ಮುಂದೆ ಹೇಳಿರುವ ವಿಷಯವೇ ಬೇರೆ. ರಾಯಣ್ಣ, ಚನ್ನಮ್ಮ ಬ್ರಿಗೇಡ್ ಇದ್ಯಾವುದರ ಬಗ್ಗೆಯೂ ಚರ್ಚೆಯಾಗಿಲ್ಲ. ಬಿಜೆಪಿ ಪಕ್ಷವನ್ನು ಶುದ್ಧೀಕರಣ ಮಾಡುವ ನಿಟ್ಟಿನಲ್ಲಿ ಸಭೆ ನಡೆಸಿದ್ದೇವೆ ಎಂದು ಹೇಳಿದರು.
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಹೀಗಿರುವಾಗ ನಮಗೆ ಅನಗತ್ಯವಾಗಿ ಭಿನ್ನಮತೀಯ ಎನ್ನುವ ಹೆಸರು ನೀಡಬೇಡಿ. ಪಕ್ಷದ ಶುದ್ಧೀಕರಣಕ್ಕಾಗಿ ನಾವು ಚರ್ಚೆ ನಡೆಸಿದ್ದೇವೆ. ನಾವು ಏನೇ ಮಾಡಿದರೂ ಪಕ್ಷದ ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದು ಸಮರ್ಥಿಸಿಕೊಂಡರು.******************************






